ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚುನಾವಣೆ ಯಾವಾಗ ನಡೆಸುತ್ತೀರಿ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಸಿದ್ದರಾಮಯ್ಯ ಅವರು, ಆದಷ್ಟು ಬೇಗನೆ ಜಿಲ್ಲಾ- ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದರು.

ಕಾಂಗ್ರೆಸ್ ನಿಂದ ಯಡಿಯೂರಪ್ಪ ಟಾರ್ಗೆಟ್ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ನನ್ನನ್ನು ಸೇರಿದಂತೆ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಹಾಗಾದರೆ ಇದನ್ನು ಏನೆಂದು ಹೇಳಬೇಕು. ನಾವು ಕ್ರಮ ಕೈಗೊಂಡರೇ ಟಾರ್ಗೆಟ್ ಎನ್ನುತ್ತಾರೆ. ಅವರು ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದರು.

ನಾವು ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಇಂದು ಮತ್ತೊಮ್ಮೆ ಹೇಳುತ್ತಿದ್ದೇನೆ. ನಾವು ಸೇಡಿನ ರಾಜಕಾರಣ ಮಾಡುವುದಿಲ್ಲ. ದ್ವೇಷ ಪ್ರತೀಕಾರ ತೀರಿಸಿಕೊಳ್ಳುವುದಿಲ್ಲ ಎಂದರು.

ಲೇಖಕಿ ಅರುಂಧತಿರಾಯ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ರೀತಿ ಹೆದರಿಸಿ ಬೆದರಿಸೋದು ಬಿಜೆಪಿ ಸಂಸ್ಕೃತಿ. ಈ ಕಾರಣದಿಂದಲೇ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿಲ್ಲ ಎಂದರು.

ನೀಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ‌ಕ್ಕೆ ಮಾತನಾಡಿ, ನಡೆದಿರುವ ನೀಟ್ ಪರೀಕ್ಷೆಯನ್ನು ರದ್ದು ಮಾಡಬೇಕು. ಮತ್ತೊಮ್ಮೆ ನೀಟ್ ಪರೀಕ್ಷೆ ‌ ನಡೆಸಬೇಕು. ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಬಾರದು ಎಂದರು.

Latest Indian news

Popular Stories