ಬಾಗಲಕೋಟೆ: ರಾಜ್ಯದಲ್ಲಿ ಅಪರಾಧ ಪತ್ತೆ, ದಟ್ಟಣೆ ನಿಯಂತ್ರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಸ್ಥಾಪನೆ ಹಿನ್ನೆಲೆಯಲ್ಲಿ ಸೆಂಟ್ರಲ್ ಕಮಾಂಡ್ ಸೆಂಟರ್ ಸ್ಥಾಪಿಸಲಾಗುತ್ತಿದೆ ಎಂದು ಗೃಹಖಾತೆ ಸಚಿವ ಜಿ. ಪರಮೇಶ್ವರ ಹೇಳಿದರು.
ನಗರದ ಎಸ್ಪಿ ಕಚೇರಿಯಲ್ಲಿ ಸಿಸಿ ಟಿವಿ ಕಮಾಂಡ್ ಸೆಂಟರ್ ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ರಾಜ್ಯದ ಎಲ್ಲ ಪೊಲೀಸ್ ಠಾಣೆಗಳನ್ನು ಇದರಡಿ ತರಲಾಗುವುದು. ಇದರಿಂದ ಅಪರಾಧ ಪತ್ತೆ, ಕಾನೂನು ಸುವ್ಯವಸ್ಥೆಗೆ ಅನುಕೂಲವಾಗಲಿದೆ ಎಂದರು.
ಸಿಸಿ ಟಿವಿ ಕಮಾಂಡ್ ಸೆಂಟರ್ ಸ್ಥಾಪನೆಗೆ 5.5 ಕೋಟಿ ವೆಚ್ಚದಲ್ಲಿ ಮಾಡಲಾಗಿದೆ. ಕಮಾಂಡ್ ಸೆಂಟರ್ ನಲ್ಲಿ ಈಗಾಗಲೇ 268 ಕ್ಯಾಮೇರಾಗಳು ಕಾರ್ಯ ನಿರ್ವಹಿಸುತ್ತಿವೆ. 173 ಕ್ಯಾಮೇರಾಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಪೊಲೀಸ್ ಇಲಾಖೆಯಲ್ಲಿನ ಸುಧಾರಣೆ ಮತ್ತು ಸಿಬ್ಬಂದಿ ಹಿತದೃಷ್ಟಿಯಿಂದ ಔರಾದ್ಕರ್ ವರದಿಯಲ್ಲಿನ ಅನೇಕ ಅಂಶಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ. ಇನ್ನಷ್ಟು ಅಂಶಗಳ ಜಾರಿಗೆ ಪರಿಶೀಲನೆ ನಡೆದಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕೆಲಸ ನಡೆದಿದೆ. ಇನ್ನೂ 25 ಸಾವಿರ ಮನೆಗಳನ್ನು ಕಟ್ಟಲಾಗುವುದು ಎಂದರು.