ಇಂದು ಬೆಳಗಾವಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಆಗಮನ

ಬೆಳಗಾವಿ : ಲೋಕಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವವರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಇನ್ನು ಕೆಲವೇ ದಿನಗಳಲ್ಲಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ನಿನ್ನೆ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವವರ ಸಂಭಾವ್ಯ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇನ್ನು ಎರಡು-ಮೂರು ದಿನಗಳಲ್ಲಿ 28 ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಗೆ ರವಾನೆ ಮಾಡಲಾಗುವುದುಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಇಂದು ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಇಂದು ರಾತ್ರಿ 9ಕ್ಕೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ. ಪಿ ನಡ್ಡಾ ನೇತೃತ್ವದಲ್ಲಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಲೋಕಸಭೆ ಕ್ಷೇತ್ರಗಳ ಕೋರ್ ಕಮಿಟಿ ಸಭೆ ನಡೆಯಲಿದೆ.

ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ್ ಈ ವಿಷಯ ತಿಳಿಸಿದ್ದು, ಸಭೆಯಲ್ಲಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಟಿಕೆಟ್ ಆಕಾಂಕ್ಷಿಗಳು ಭಾಗವಹಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಿಕ್ಕೋಡಿಯಲ್ಲಿ ಬಿಜೆಪಿ ಬೂತ್ ಮೇಲ್ಪಟ್ಟ ಕಾರ್ಯಕರ್ತರ ಸಭೆ ನಡೆಯಲಿದೆ. ನಂತರ ಪ್ರಬುದ್ಧರ ಸಭೆಯಲ್ಲಿ ಅವರು ಭಾಗವಹಿಸಿ ದೆಹಲಿಗೆ ತೆರಳಲಿದ್ದಾರೆ ಎಂದರು.

ವಿಶೇಷವಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ಲೋಕಸಭಾ ಚುನಾವಣೆಯ ತಯಾರಿ, ಮತ್ತೆ ಸಂಘಟನೆಯ ದೃಷ್ಟಿಕೋನದಿಂದ ಸಭೆ ನಡೆಯುತ್ತಿದೆ ಎಂದರು. ಈ ವೇಳೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ‌ ಬಿಜೆಪಿ ಕೆಲಸಗಳನ್ನು ವಿಸ್ತೃತವಾಗಿ ತಿಳಿಸಲಾಗುತ್ತದೆ. ಅಲ್ಲದೇ ಭವಿಷ್ಯದಲ್ಲಿ ಪ್ರಥಮ ಆರ್ಥಿಕ ಶಕ್ತಿಯಾಗಿ ಭಾರತ ಹೊರ ಹೊಮ್ಮುವ ಬಗ್ಗೆ ಸಭೆಯಲ್ಲಿ ಜೆ ಪಿ ನಡ್ಡಾ ಅವರು ಮಾತನಾಡಲಿದ್ದಾರೆ ಎಂದು ಹೇಳಿದರು..

Latest Indian news

Popular Stories