ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮುಂದುವರೆದಿದ್ದು, ಸಿಎಂ ಬಿಎಸ್ವೈ ಭ್ರಷ್ಟಾಚಾರ ಕುರಿತು ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡಲಾಗುತ್ತದೆ ಎನ್ನುವ ಮೂಲಕ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನನ್ನ ಬಳಿ ಭ್ರಷ್ಟಾಚಾರ ಸಂಬAಧ ಬ್ರಹ್ಮಾಸ್ತ್ರವಿದೆ. ಸಿಎಂ ಯಡಿಯೂರಪ್ಪ ಭ್ರಷ್ಟಾಚಾರ ಬಯಲು ಮಾಡಿದರೆ, ಅವರ ಪರ ಬ್ಯಾಟಿಂಗ್ ಮಾಡುತ್ತಿರುವ ಮಠಾಧೀಶರು ಮಠ ಬಿಟ್ಟು ಓಡಬೇಕಾಗುತ್ತದೆ. ಹೀಗಾಗಿ ಅವರ ಪರ ಬ್ಯಾಟಿಂಗ್ ಮಾಡುವ ಮುನ್ನ ಎಚ್ಚರವಹಿಸಿ’ ಎಂದು ಎಚ್ಚರಿಕೆ ನೀಡಿದರು.
ಯಡಿಯೂರಪ್ಪ ರಾಜ್ಯದಲ್ಲಿ ಮಂತ್ರಿನೂ ಆಗಿರಲಿಲ್ಲ, ನಾನು ಆಗ ಕೇಂದ್ರ ಸಚಿವನಾಗಿದ್ದೆ. ನಾನು ಈ ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಹಾಗೆ ನೋಡಿದರೆ ಸದಾನಂದಗೌಡ, ಜಗದೀಶ್ ಶೆಟ್ಟರ್ ಅವರಿಗಿಂತ ನಾನು ಹಿರಿಯ. ನನ್ನ ರಾಜಕೀಯ ಜೀವನ ಅಂತ್ಯವಾದರೂ ಪರವಾಗಿಲ್ಲ. ಭ್ರಷ್ಟಾಚಾರ, ಕುಟುಂಬಶಾಹಿ ವಿರುದ್ಧ ನನ್ನ ಹೋರಾಟ ನಿಲ್ಲಿಸುವುದಿಲ್ಲ’ ಎಂದುಯ ಹತ್ನಾಳ್ ಘೋಷಿಸಿದರು.
`ಯಡಿಯೂರಪ್ಪನವರೇ ಗೌರವಯುತವಾಗಿ ನಿವೃತ್ತಿಯಾಗಿ. ನಿಮ್ಮ ಭ್ರಷ್ಟಾಚಾರದ ಕರ್ಮಕಾಂಡವೇ ನಮ್ಮ ಬಳಿ ಇದೆ. ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಿದರೆ, ಮಠಾಧೀಶರು ಮಠ ಬಿಟ್ಟು ಓಡಬೇಕಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಪಕ್ಷದ ಹಿತದೃಷ್ಟಿಯಿಂದ ಹಾಗೂ ನಿಮ್ಮ ಕುಟುಂಬದ ಹಿತದೃಷ್ಟಿಯಿಂದಲೂ ನಿವೃತ್ತಿ ಒಳ್ಳೆಯದು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ.