ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ: ಸಿಎಂ, ಡಿಸಿಎಂಗೆ ಶಾಸಕರ ತಂಡ ಮನವಿ

ಬೆಂಗಳೂರು: ರಾಜಧಾನಿ ಬೆಂಗಳೂರು ದಿನೇ ದಿನೇ ತನ್ನ ಕಬಂಧ ಬಾಹುವನ್ನು ವಿಸ್ತರಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಇರುವ ಪ್ರಮುಖ ಬೇಡಿಕೆಯಾದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರತನಿಧಿಗಳ ತಂಡವು ಮನವಿ ಮಾಡಿದೆ.

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿದರೆ ಈ ಭಾಗದ ಜನತೆಗೆ ಅನುಕೂಲವಾಗುವುದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗವೂ ವಾಣಿಜ್ಯ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ .

ರಾಮನಗರ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್, ಮಾಗಡಿ ಶಾಸಕರಾದ ಎಚ್.ಸಿ.ಬಾಲಕೃಷ್ಣ, ಮಳವಳ್ಳಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಮದ್ದೂರು ಶಾಸಕರಾದ ಕೆ.ಎಂ. ಉದಯ್‌, ಮಂಡ್ಯ ಶಾಸಕರಾದ ಪಿ.ರವಿಕುಮಾರ್, ಆನೇಕಲ್‌ ಶಾಸಕರಾದ ಶಿವಣ್ಣ, ನೆಲಮಂಗಲ ಶಾಸಕರಾದ ಎನ್.ಶ್ರೀನಿವಾಸ್, ವಿಧಾನ ಪರಿಷತ್‌ ಶಾಸಕರುಗಳಾದ ಎಸ್.ರವಿ, ದಿನೇಶ್ ಗೂಳಿಗೌಡ, ಪುಟ್ಟಣ್ಣ ಹಾಗೂ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೆ ಗೌಡ) ಅವರ ತಂಡವು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ವಿಮಾನ ದಟ್ಟಣೆ ದಿನೇದಿನೇ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬೆಂಗಳೂರು ನಗರದ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಅವಶ್ಯಕತೆಯಿದ್ದು ಈ ಸಂಬಂಧ ಈಗಾಗಲೇ ಜಾಗ ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರಿನ ಉತ್ತರ ಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚರಿಸುವ ಪ್ರಯಾಣಿಕರ ಪೈಕಿ ಅರ್ಧದಷ್ಟು ಪ್ರಯಾಣಿಕರು ದಕ್ಷಿಣ ಭಾಗದವರೇ ಆಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ, ಬನ್ನೇರುಘಟ್ಟ ರಸ್ತೆ, ಜಯನಗರ, ಜೆ.ಪಿ.ನಗರ, ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ ರಸ್ತೆ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವುದರಿಂದ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿದರೆ ಈ ಭಾಗದ ಜನತೆಗೆ ಅನುಕೂಲವಾಗುವುದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗವೂ ವಾಣಿಜ್ಯ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಲಿದೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ ಪ್ರಯಾಣಿಕರ ಸಂಚಾರಕ್ಕಾಗಿ ಮೆಟ್ರೋ ಸಂಪರ್ಕವಿದೆ. ಎಲೆಕ್ಟ್ರಾನಿಕ್ ಸಿಟಿ, ಕನಕಪುರ ರಸ್ತೆ, ಬನ್ನೇರುಘಟ್ಟ ರಸ್ತೆ, ಮೈಸೂರು ರಸ್ತೆಗೆ ಮೆಟ್ರೋ ಸಂಪರ್ಕ ಕಲ್ಪಿಸಿರುವುದರ ಜೊತೆಗೆ ನೈಸ್ ರಸ್ತೆಯಂತಹ ಹೊರವಲಯದ ರಸ್ತೆ ಕೂಡ ಇರುವುದರಿಂದ ಸಂಚಾರ ದಟ್ಟಣೆ ಕಿರಿಕಿರಿಯನ್ನು ತಪ್ಪಿಸಬಹುದಾಗಿದೆ.

ಈ ಭಾಗದಲ್ಲಿ ಕಾವೇರಿ, ಅರ್ಕಾವತಿ ನದಿ ಜೊತೆಗೆ ಕಣ್ವ, ಮಂಚನಬೆಲೆ, ಜಲಾಶಯಗಳಿರುವುದರಿಂದ ಈ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರುವುದಿಲ್ಲ. ಇದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗದ ಭೂಪ್ರದೇಶ ಸಮತಟ್ಟಗಾಗಿದೆ. ರನ್ ವೇ ನಿರ್ಮಾಣಕ್ಕೆ ಕನಿಷ್ಠ 3-5 ಕಿ.ಮೀ.ನಷ್ಟು ಉದ್ದದ ಸಮತಟ್ಟು ಭೂಮಿಯ ಅವಶ್ಯಕತೆ ಇರುವುದರಿಂದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಗಳೂರು ದಕ್ಷಿಣ ಭಾಗ ಸೂಕ್ತ ಪ್ರದೇಶವಾಗಿದೆ.

ಬೆಂಗಳೂರು ನಗರದ ನಂತರದಲ್ಲಿ ಎರಡನೇ ಐಟಿ ನಗರವಾಗಿ ಮೈಸೂರು ನಗರ ಹೊರಹೊಮ್ಮುತ್ತಿದೆ. ವಿಶ್ವದ ನಾನಾ ಭಾಗಗಳಿಂದ ಪ್ರವಾಸಿಗರನ್ನು ಸೆಳೆಯುತ್ತಿರುವ ಮೈಸೂರಿಗೆ ಬೆಂಗಳೂರಿನಿಂದ ಸಂಚರಿಸುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಪ್ರಯಾಣಿಕರ ಸಂಚಾರಕ್ಕೆ ವರದಾನವಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿ ನಿರ್ಮಾಣದ ನಂತರ ರಾಮನಗರ, ಚನ್ನಪಟ್ಟಣ, ಮದ್ದೂರು ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.

ಕಾವೇರಿ ನದಿ ತಪ್ಪಲಿನ ಈ ಭಾಗದಲ್ಲಿ ನೀರಿನ ಸೌಕರ್ಯ ಕೂಡ ಚೆನ್ನಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ಬಿಡದಿ ಕೈಗಾರಿಕಾ ಪ್ರದೇಶವಿದ್ದು ಟೊಯೋಟಾ ಕಿರ್ಲೋಸ್ಕರ್ ನಂತಹ ಕಾರು ತಯಾರಿಕಾ ಕಂಪನಿ ಜೊತೆಗೆ ನಾನಾ ಪ್ರಮುಖ ಕೈಗಾರಿಕೆಗಳನ್ನು ಹೊಂದಿರುವ ಬಿಡದಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿದೆ.

ಶಿಕ್ಷಣ ಸಂಸ್ಥೆಗಳು, ಹೈಟೆಕ್ ಆಸ್ಪತ್ರೆ, ಸ್ಟಾರ್ ಹೋಟೆಲ್, ರೆಸಾರ್ಟ್ ಗಳನ್ನು ಒಳಗೊಂಡಿರುವ ಬೆಂಗಳೂರು ದಕ್ಷಿಣ ಭಾಗದಲ್ಲಿ ಸುಸಜ್ಜಿತ ರಸ್ತೆ ಸೇರಿದಂತೆ ಎಲ್ಲಾ ರೀತಿಯ ಮೂಲಸೌಕರ್ಯವನ್ನು ಕೂಡ ಒಳಗೊಂಡಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಕೂಡ ಬಿಡದಿಗೆ ಹೊಂದಿಕೊಂಡಿರುವುದರಿಂದ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೈಸೂರು ರಸ್ತೆಯಲ್ಲಿ ಮಾಡಿದರೆ ಸೂಕ್ತವಾಗಿರಲಿದೆ.

ಯಾವುದೇ ಸಂಚಾರ ದಟ್ಟಣೆ ಇಲ್ಲದ ಮೈಸೂರು ರಸ್ತೆಯಲ್ಲಿ ಅಗತ್ಯವಾದ ಭೂಮಿ ಜೊತೆಗೆ ಉತ್ತಮ ವಾತಾವರಣವಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದಲ್ಲಿ ಈ ಭಾಗದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗುವುದರ ಜೊತೆಗೆ ಉದ್ಯೋಗ ಸೃಷ್ಟಿಯಾಗಲಿದೆ.

Latest Indian news

Popular Stories