ಅಕ್ಕಿ ಪೂರೈಕೆ ವಿಚಾರದಲ್ಲಿ ಕೇಂದ್ರ ರಾಜಕೀಯ: ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಸುತ್ತಿಲ್ಲ ಸಿಎಮ್ ಸಿದ್ದರಾಮಯ್ಯ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರದ ಘೋಷಿಸಿದ ಗ್ಯಾರಂಟಿಗಳಲ್ಲಿ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಕೂಡ ಒಂದು. ಆದರೆ, ಈಗ ಈ ಯೋಜನೆ ಜಾರಿಗೆ ಅಕ್ಕಿ ಕೊರತೆ ಉಂಟಾಗಿದ್ದು, ಅಕ್ಕಿ ಪೂರೈಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಸರ್ಕಾರ ಏಕೆ ಪೂರೈಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐದು ಗ್ಯಾರಂಟಿಗಳನ್ನು ಈಗಾಗಲೇ ಘೋಷಣೆ ಮಾಡಿದ್ದು, ಯಾವಾಗ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದೇವೆ. ಐದರ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು.

ಬಿಪಿಎಲ್, ಅಂತ್ಯೋದಯ ಕಾರ್ಡ್ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ. ಇದಕ್ಕಾಗಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಬೇಕು. ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ಆಗಲಿದೆ. ಕೆಜಿ ಅಕ್ಕಿಗೆ 34 ರೂ. ಹಾಗೂ 2.60 ಪೈಸೆ ಟ್ರಾನ್ಸ್‌ಪೋರ್ಟ್‌ ದರ ಆಗುತ್ತದೆ. ವರ್ಷಕ್ಕೆ 10,092 ಕೋಟಿ ರೂ. ಬೇಕು ಎಂದು ಹೇಳಿದರು.

ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಭಾರತೀಯ ಆಹಾರ ನಿಗಮದ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದೇವು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಡೆಪ್ಯುಟಿ ಮ್ಯಾನೇಜರ್ ಜೂನ್ 12 ರಂದು ತಮಗೆ ಪತ್ರ ಬರೆದು ಹೆಚ್ಚುವರಿಯಾಗಿ 2,08,425 ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಕೇಂದ್ರದ ಒಪ್ಪಿಗೆ ಆಧಾರದಲ್ಲಿ ಜುಲೈ 1 ರಿಂದ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವು. ಆದರೆ, ಆ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದರು.

Latest Indian news

Popular Stories