ಪುತ್ತೂರು:ಉಪ್ಪಿನಂಗಡಿಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮುಖಂಡರನ್ನು ಉಪ್ಪಿನಂಗಡಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.ಈ ಸಂದರ್ಭದಲ್ಲಿ ಪಿಎಫ್ಐ ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 14ರಂದು ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪ್ರಸನ್ನಕುಮಾರ್ ಎಂಬುವರ ಹಲ್ಲೆ ನಡೆದಿದೆ ಎಂಬ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ.
ಮಡಂತ್ಯಾರು ಕುಕ್ಕಲ ಗ್ರಾಮದ ಬೋರುಗದ್ದೆ ನಿವಾಸಿ ಮುಹಮ್ಮದ್ ಹನೀಫ್ (41) ಎಂಬುವವರನ್ನು ಬಂಧಿಸಲಾಗಿದೆ. ಮಂಗಳವಾರ ಜನವರಿ 11 ರಂದು ಮಡಂತ್ಯಾರು ಪಂಚಾಯತ್ ಕಚೇರಿ ಬಳಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಘಟನೆಗೆ ಸಂಬಂಧಿಸಿದಂತೆ ಈ ಹಿಂದೆ ಏಳು ಮಂದಿಯನ್ನು ಬಂಧಿಸಲಾಗಿತ್ತು. ಪ್ರತಿಭಟನೆ ವೇಳೆ ನಡೆದ ಬೆಳವಣಿಗೆಗೆ ಸಂಬಂಧಿಸಿದಂತೆ ಕರ್ತವ್ಯ ನಿರತ ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಲ್ಲೆಯ ಆರೋಪದ ಮೇಲೆ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಈವರೆಗೆ ಒಟ್ಟು 18 ಜನರನ್ನು ಬಂಧಿಸಲಾಗಿದೆ.