ಕೋಮುವಾದಿ ವಿಚಾರ: ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್-ಜೆಡಿಎಸ್

ಬೆಂಗಳೂರು: ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಬಲಪಂಥೀಯ ಸಂಘಟನೆಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳತ್ತಿಲ್ಲ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿತು.

‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿಯು ರಾಜಕೀಯ ಲಾಭಕ್ಕಾಗಿ ನಮ್ಮ ಸಮಾಜವನ್ನು ಕೋಮುವಾದದ ವಿಷಯಗಳ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಮುಂದಿನ ದಿನಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ. ಸಮಾಜಘಾತುಕ ಶಕ್ತಿಗಳು ನಮ್ಮ ರಾಜ್ಯದಲ್ಲಿ ಶಾಂತಿ ಕದಡುತ್ತಿರುವುದು ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಯ ಮೌನವು ಅವರಿಗೆ ಬೆಂಬಲವನ್ನು ಸೂಚಿಸುತ್ತದೆಯೇ ಅಥವಾ ಸಮಸ್ಯೆಯನ್ನು ನಿಭಾಯಿಸುವಲ್ಲಿ ಅವರ ವೈಫಲ್ಯತೆಯನ್ನು ಸೂಚಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಒಟ್ಟಾರೆ ಪ್ರಗತಿಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮುಖ್ಯವಾಗುತ್ತದೆ. ಮುಖ್ಯಮಂತ್ರಿಗೆ ಜನರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಎಲ್ಲವೂ ಕೈಮೀರುವ ಮೊದಲು ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಮುಖ್ಯಮಂತ್ರಿಗಳ ಈ ವೈಫಲ್ಯವು ಜನರಿಗೆ ನೋವುಂಟು ಮಾಡಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಹಿರಿಯೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. “ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದರೆ ಹೂಡಿಕೆದಾರರು ರಾಜ್ಯಕ್ಕೆ ಹೇಗೆ ಬರುತ್ತಾರೆ?” ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಬಿಜೆಪಿಗೆ, ಚುನಾವಣಾ ರಾಜಕೀಯವು ಹೆಚ್ಚು ಮುಖ್ಯವಾಗಿದೆ ಮತ್ತು ಅವರು ರಾಜಕೀಯ ಲಾಭ ಪಡೆಯಲು ಎಲ್ಲಾ ವಿಷಯಗಳನ್ನು ಭಾವನಾತ್ಮಕ ರೀತಿಯಲ್ಲಿ ಆಟವಾಡುತ್ತಾರೆ. ರಾಜ್ಯದಲ್ಲಿ ಇದೇ ರೀತಿಯ ಸ್ಥಿತಿ ಮುಂದುವರಿದರೆ ಬಿಜೆಪಿ ವಿರುದ್ಧ ಜನ ದಂಗೆ ಏಳುತ್ತಾರೆ ಎಂದು ಹೇಳಿದ್ದಾರೆ.

ಕೆಲವು ಬಲಪಂಥೀಯ ಸಂಘಟನೆಗಳು ರಾಸಾಯನಿಕಗಳನ್ನು ಬಳಸುತ್ತಿದ್ದಾರೆಂದು ಹೇಳುವ ಮೂಲಕ ಮುಸ್ಲಿಂ ಮಾರಾಟಗಾರರಿಂದ ಮಾವಿನಹಣ್ಣುಗಳನ್ನು ಖರೀದಿಸದಂತೆ ಜನರಿಗೆ ಹೇಳುತ್ತಿದ್ದಾರೆ. ಈ ಮೂಲಕ ಹೊಸ ವಿವಾದವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದು ರಾಷ್ಟ್ರ ವಿರೋಧಿ ಚಟುವಟಿಕಯಾಗಿದ್ದು, ಜನರು ಇದನ್ನು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹಿಜಾಬ್ ಬಳಿಕ ಹಲಾಲ್ ಮಾಂಸ ಅಭಿಯಾನ ಆರಂಭವಾಗಿತ್ತು. ಇದೀಗ ಮಸೀದಿಗಳಲ್ಲಿನ ಧ್ವನಿವರ್ಧಕ ಬಳಕೆ ನಿಯಂತ್ರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

Latest Indian news

Popular Stories