ಬೆಂಗಳೂರು: ಕೋವಿಡ್ನಿಂದ ಮೃತಪಟ್ಟಿದ್ದ ಇಬ್ಬರ ಮೃತದೇಹಗಳು ಬರೋಬ್ಬರಿ 1 ವರ್ಷ ಮೂರು ತಿಂಗಳ ನಂತರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬೆಚ್ಚಿಬೀಳಿಸುವ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ.
ಜುಲೈ 2020ರಲ್ಲಿ ಕೋವಿಡ್ನಿಂದ ಮೃತಪಟ್ಟಿದ್ದ ಇಬ್ಬರ ಮೃತದೇಹಗಳು 1 ವರ್ಷ ಮೂರು ತಿಂಗಳ ಕಾಲ ರಾಜಾಜಿನಗರ ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲೇ ಉಳಿದ ಆಘಾತಕಾರಿ ಘಟನೆ ನಡೆದಿದೆ.
ಶವಾಗಾರವನ್ನು ಸ್ವಚ್ಛಗೊಳಿಸಲು ಹೋದಾಗ ಶೈತ್ಯಾಗಾರದಲ್ಲೇ ಎರಡು ಮೃತದೇಹಗಳು ಕೊಳೆತು ನಾರುತ್ತಿದ್ದವು. ಮೃತದೇಹಗಳಿಗೆ ಹಾಕಿದ್ದ ಬಿಬಿಎಂಪಿ ಟ್ಯಾಗ್ನಿಂದಾಗಿ ಮೃತದೇಹಗಳು ಚಾಮರಾಜಪೇಟೆಯ ದುರ್ಗಾ (40) ಮತ್ತು ಕೆ.ಪಿ ಅಗ್ರಹಾರದ ಮುನಿರಾಜು(35) ಅವರದ್ದು ಎಂದು ತಿಳಿದು ಬಂದಿದೆ.
ಈ ಘಟನೆಗೆ ಇಎಸ್ಐ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಬಿಬಿಎಂಪಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪಗಳು ಕೇಳಿಬಂದಿವೆ.
ಮೃತದೇಹಗಳನ್ನು ಅಂತ್ಯಕ್ರಿಯೆಗೆ ಬಿಬಿಎಂಪಿಗೆ ಒಪ್ಪಿಸಲು ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಮೊದಲ ಅಲೆಯಲ್ಲಿ ಬಿಬಿಎಂಪಿಯೇ ಕೋವಿಡ್ ಮೃತದೇಹಗಳ ಅಂತ್ಯಕ್ರಿಯೆ ನಡೆಸುತ್ತಿದ್ದ ಕಾರಣ ಮೃತರ ಕುಟುಂಬದ ಸದಸ್ಯರು ಸಹ ಆಸ್ಪತ್ರೆಯ ಕಡೆ ಸುಳಿದಿರಲಿಲ್ಲ. ಆದರೆ ಆಸ್ಪತ್ರೆ ಹಾಗೂ ಬಿಬಿಎಂಪಿ ನಡುವೆ ಆದ ಸಂವಹನ ಕೊರತೆಯಿಂದ ಈ ಎರಡು ಮೃತದೇಹಗಳು ಶವಾಗಾರದಲ್ಲೇ ಉಳಿದಿವೆ ಎಂದು ತಿಳಿದುಬಂದಿದೆ.