ಬೆಂಗಳೂರು: ಮಂಡ್ಯ ಜಿಲ್ಲೆಯ ಮೇಲುಕೋಟೆ ಜೆಡಿಎಸ್ ಶಾಸಕ ಪುಟ್ಟರಾಜು ಗುರುವಾರ ಸಂಜೆ ಸಿದ್ದರಾಮಯ್ಯ ನಿವಾಸದಲ್ಲಿ ಕಾಣಿಸಿಕೊಂಡು ಚರ್ಚೆಯಲ್ಲಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಹಿಗ್ಗಾಮುಗ್ಗಾ ಟೀಕಿಸುವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಎಂಬಿ ಪಾಟೀಲ್ ಜೊತೆ ಸಿದ್ದರಾಮಯ್ಯ ನಿವಾಸದಲ್ಲಿ ಪುಟ್ಟರಾಜು ಕಾಣಿಸಿಕೊಂಡಿದ್ದು ಈಗ ಕುತೂಹಲಕ್ಕೆ ಕಾರಣವಾಗಿದೆ.
ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ಕಾಂಗ್ರೆಸ್ ನಾಯಕರು ಈಗಾಗಲೇ ಹಲವು ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಹೇಳಿಕೆಗಳ ಮಧ್ಯೆ ಪುಟ್ಟರಾಜು ಸಿದ್ದರಾಮಯ್ಯ ನಿವಾಸದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ನಮ್ಮ ಪಕ್ಷದ ಕೆಲವು ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಾರೆ. ಪಾಪ ಏನೋ ಕೆಲಸ ಇರುತ್ತದೆ ಹೋಗಿರುತ್ತಾರೆ. ಏನೋ ಕಾರಣಕ್ಕೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಕೆಲವರು ಅವರಿಂದಲೇ ಗೆದ್ದಿದ್ದಾರೆ ಪಾಪ ಎಂದು ತಮ್ಮದೇ ಪಕ್ಷದ ಶಾಸಕರ ವಿರುದ್ದ ಕುಮಾರಸ್ವಾಮಿ ಗುರುವಾರ ಅಸಮಾಧಾನ ಹೊರ ಹಾಕಿದ್ದರು. ಈ ಹೇಳಿಕೆ ಹೊರ ಬಿದ್ದ ಬೆನ್ನಲ್ಲೇ ಸಂಜೆ ಪುಟ್ಟರಾಜು ಸಿದ್ದರಾಮಯ್ಯ ನಿವಾಸದಲ್ಲಿ ಪ್ರತ್ಯಕ್ಷರಾಗಿದ್ದಾರೆ.