ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಕಾದು ಕುಳಿತ್ತಿದ್ದರು. ಆದ್ರೆ, ಇದೀಗ ಡಿಕೆ ಶಿವಕುಮಾರ್, ಯೋಗೇಶ್ವರ್ ಅವರನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ.
ಹೌದು… ಸಿಪಿ ಯೋಗೇಶ್ವರ್ ಅವರು .ಇಂದು(ಅಕ್ಟೋಬರ್ 23) ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಬಳಿಕ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ತೆರಳಿ ಸಿಎಂ ಸಿದ್ದರಾಯ್ಯನವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಯೋಗೇಶ್ವರ್ ನಿನ್ನೆಯವರೆಗೂ ಕಾದು ಕುಳಿತ್ತಿದ್ದರು. ಸಂಜೆ ವರೆಗೂ ಕಾಯುತ್ತೇನೆ ಎಂದು ಯೋಗೇಶ್ವರ್ ಅವರು ಪ್ರಲ್ಹಾದ್ ಜೋಶಿ, ಸಂಸದ ಡಾ.ಸಿ.ಎನ್.ಮಂಜುನಾಥ್ಗೆ ತಿಳಿಸಿ ಎಂದು ನಿನ್ನೆ ಚನ್ನಪಟ್ಟಣದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದರು. ಆದ್ರೆ, ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇತ್ತ ಯೋಗೇಶ್ವರ್ ಕಾಂಗ್ರೆಸ್ ಮನೆ ಸೇರುವುದು ಗೊತ್ತಾಗುತ್ತಿದ್ದಂತೆಯೇ ಅತ್ತ ಕುಮಾರಸ್ವಾಮಿ ಸಹ ಚನ್ನಪಟ್ಟಣ ಜೆಡಿಎಸ್ ಮುಖಂಡರ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಟಟ್ಟಣ ಉಪಚುನಾವಣೆ ಅಖಾಡ ಮತ್ತಷ್ಟು ರಂಗೇರಿದೆ.