ಬೆಂಗಳೂರು, ಏಪ್ರಿಲ್ 17: ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯಾದ್ಯಂತ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು (Black coat) ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ (Karnataka High Court) ವಿನಾಯಿತಿ ನೀಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ / ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚುತ್ತಿದ್ದು, ತಾಪಮಾನವೂ ಹಲವು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಹೀಗಾಗಿ ಇಂಥ ಸಂದರ್ಭದಲ್ಲಿ ಕಪ್ಪು ಕೋಟು ಧರಿಸಿ ಬರುವುದರಿಂದ ಮತ್ತಷ್ಟು ಸಮಸ್ಯೆಯಾಗುತ್ತದೆ. ಹೀಗಾಗಿ ತಾತ್ಕಾಲಿಕವಾಗಿ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.