ಎನ್‌ಡಿಎ ಮತ್ತು ಇಂಡಿಯಾ ಮೈತ್ರಿ ಕೂಟದಿಂದ ದೂರ ಉಳಿಯಲು ಜೆಡಿಎಸ್‌ ನಿರ್ಧಾರ – ಎಚ್.ಡಿ ದೇವೇಗೌಡ

ಪ್ರಾದೇಶಿಕ ಪಕ್ಷದ ಉಳಿವಿನ ದೃಷ್ಟಿಯಿಂದ ಸ್ವತಂತ್ರವಾಗಿಯೇ ಸ್ಪರ್ಧಿಸಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಇಂಗಿತ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ ಶಾಸಕರ ಸಭೆಯಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಯಾರ ಜೊತೆಯೂ ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಪ್ರಾದೇಶಿಕ ಪಕ್ಷ ಜೆಡಿಎಸ್‌ನ ಉಳಿವಿನ ದೃಷ್ಟಿಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಚುನಾವಣೆ ಎದುರಿಸಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ 26 ಪಕ್ಷಗಳ ಐಎನ್‌ಡಿಐಎ ಒಕ್ಕೂಟವನ್ನು ಸೇರುವ ಪ್ರಶ್ನೆಯೇ ಇಲ್ಲ ಎಂಬುದನ್ನು ಜೆಡಿಎಸ್‌ ವರಿಷ್ಠ ಸ್ಪಷ್ಟಪಡಿಸಿದ್ದಾರೆ.

ಗುರುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಜೆಡಿಎಸ್‌ ಶಾಸಕರ ಸಭೆ ನಡೆಸಿದ ಅವರು ಸ್ವತಂತ್ರ ಹೋರಾಟದ ಬಗೆಗಿನ ತಮ್ಮ ಅಭಿಪ್ರಾಯವನ್ನು ಶಾಸಕರಿಗೆ ಸ್ಪಷ್ಟಪಡಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಯಬೇಕಿದೆ, ಒಂದು ಕಡೆ ಎನ್‌ಡಿಎ, ಇನ್ನೊಂದು ಕಡೆ ಐಎನ್‌ಡಿಐಎ ಇದೆ. ಯಾವ ದಾರಿಯಲ್ಲಿ ಹೋಗಬೇಕೆಂದು ನಮ್ಮ ಶಾಸಕರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿ ದೇವೇಗೌಡ, ಅದು ಆ ರೀತಿ ಅಲ್ಲ. ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಕುರಿತು ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಸ್ತಾಪಿಸಿದ್ದರು. ಬಿಜೆಪಿ ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿತು. ಬಿಜೆಪಿ ಶಾಸಕರ ಸಂಖ್ಯೆ ಹೆಚ್ಚಿದ್ದು ಅವರು ಸದನದಿಂದ ಹೊರನಡೆದಾಗ, ನಾವು ಕೂಡ ಅದನ್ನೇ ಅನುಸರಿಸಿದ್ದೇವೆ. ಹಾಗೆಂದು ಬಿಜೆಪಿ ಜೊತೆ ಜೆಡಿಎಸ್‌ ಕೈ ಜೋಡಿಸಿದೆ ಎಂದರ್ಥವಲ್ಲ ಎಂದರು.

Latest Indian news

Popular Stories