ನೇಜಾರು ಕೊಲೆ ಪ್ರಕರಣ: ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ – ಉಡುಪಿ ನ್ಯಾಯಾಲಯದಿಂದ ಆ 24 ಕ್ಕೆ ವಿಚಾರಣೆ ಮುಂದೂಡಿಕೆ!

“ಉಡುಪಿ, ಜು.20: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಜು.18ರಂದು ಆದೇಶ ನೀಡಿದೆ.

ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಈ ಅರ್ಜಿಯ ಮುಂದಿನ ವಿಚಾರಣೆ ನಡೆಸುವವರೆಗೆ ಉಡುಪಿ ಕೋರ್ಟ್‌ನಲ್ಲಿನ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದರು.

ಆ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಜು.18ರಂದು ನಡೆಯಬೇಕಾಗಿದ್ದ ಸಾಕ್ಷಿಗಳ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ನೀಡಿದರು ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭ ಬೆಂಗಳೂರಿನ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.”
.

Latest Indian news

Popular Stories