ಕಾವೇರಿ ವಿಚಾರದಲ್ಲಿ ಪ್ರಧಾನಿಗೆ ದೇವೇಗೌಡರ ಪತ್ರ: ಮಾಜಿ ಪಿಎಂ ನಡೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂಬ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಎದುರಿಸುತ್ತಿರುವ ಸಂಕಷ್ಟವನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಬರೆದ ಪತ್ರವನ್ನು ನಾನು ಸ್ವಾಗತಿಸುತ್ತೇನೆ.

ಸದ್ಯದ ಪರಿಸ್ಥಿತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಮಾತ್ರ ಈ ಪರಿಸ್ಥಿತಿಗೆ ಪರಿಣಾಮಕಾರಿ ಮತ್ತು ಸೂಕ್ತ ಪರಿಹಾರವಾಗಿದೆ, ಎಂದು ಸಿಎಂ ಹೇಳಿದರು.

ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿ ಮಾಡುವಂತೆ ಮಾಡಬೇಕು ಎಂದು ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದಿರುವ ಸಿದ್ದರಾಮಯ್ಯ, ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

Latest Indian news

Popular Stories