INTERNATIONALFeatured Story

26/11ರ ದಾಳಿಯ ಆರೋಪಿ ತಹವ್ವೂರ್ ರಾಣಾನ ಹಸ್ತಾಂತರಕ್ಕೆ ಅಮೆರಿಕಾ ಒಪ್ಪಿಗೆ, Donald Trump ಘೋಷಣೆ

ವಾಷಿಂಗ್ಟನ್: 26/11ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ಹೊಂದಿರುವ ಕಾರಣಕ್ಕೆ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ತಹವ್ವೂರ್ ರಾಣಾನನ್ನು ಭಾರತದಲ್ಲಿ ಕಾನೂನಿನ ಪ್ರಕಾರ ತನಿಖೆ ಎದುರಿಸಲು ಹಸ್ತಾಂತರಕ್ಕೆ ತಮ್ಮ ಆಡಳಿತ ಅನುಮೋದನೆ ನೀಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ ತಹವ್ವೂರ್ ರಾಣಾ ಪ್ರಸ್ತುತ ಲಾಸ್ ಏಂಜಲೀಸ್‌ನಲ್ಲಿರುವ ಮೆಟ್ರೋಪಾಲಿಟನ್ ಬಂಧನ ಕೇಂದ್ರದಲ್ಲಿದ್ದಾನೆ. ಭಾರತದಲ್ಲಿ 26/11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ಈತ ಸಂಬಂಧ ಹೊಂದಿದ್ದನೆಂದು ತಿಳಿದುಬಂದಿದೆ.

ಅಮೆರಿಕ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಂದು ನಮ್ಮ ಸರ್ಕಾರವು ವಿಶ್ವದ ಅತ್ಯಂತ ದುಷ್ಟರಲ್ಲಿ ಒಬ್ಬನಾದ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದವರನ್ನು ಭಾರತದಲ್ಲಿ ನ್ಯಾಯ ಎದುರಿಸಲು ಹಸ್ತಾಂತರಿಸಲು ಅನುಮೋದನೆ ನೀಡಿದೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಭಾರತದಲ್ಲಿ ಕಾನೂನು ಪ್ರಕಾರ ವಿಚಾರಣೆ ಎದುರಿಸಲಿ ಎಂದರು.

ಈ ಪ್ರಕರಣದಲ್ಲಿ ರಾಣಾ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಜನವರಿಯಲ್ಲಿ ತಿರಸ್ಕರಿಸಿದ ಅಮೆರಿಕದ ಸುಪ್ರೀಂ ಕೋರ್ಟ್, ರಾಣಾ ಹಸ್ತಾಂತರವನ್ನು ತೆರವುಗೊಳಿಸಿತ್ತು.ರಾಣಾನನ್ನು ಆದಷ್ಟು ಬೇಗ ಗಡಿಪಾರು ಮಾಡಲು ಅಮೆರಿಕದ ಅಧಿಕಾರಿಗಳೊಂದಿಗೆ ನಿಕಟವಾಗಿ ಸಂಪರ್ಕ ಹೊಂದಿ ಕಾರ್ಯಪ್ರವೃತ್ತವಾಗಿರುವುದಾಗಿ ಭಾರತ ಕಳೆದ ತಿಂಗಳು ಹೇಳಿತ್ತು.

ಜನವರಿ 21 ರಂದು ಅಮೆರಿಕದ ಸುಪ್ರೀಂ ಕೋರ್ಟ್ ಆರೋಪಿಗಳ ಅರ್ಜಿಯನ್ನು ಆಲಿಸಲು ನಿರಾಕರಿಸಿತು. ಮುಂಬೈ ಭಯೋತ್ಪಾದಕ ದಾಳಿಯ ಆರೋಪಿಗಳನ್ನು ಆದಷ್ಟು ಬೇಗ ಭಾರತಕ್ಕೆ ಹಸ್ತಾಂತರಿಸುವ ಕಾರ್ಯವಿಧಾನದ ಕುರಿತು ನಾವು ಈಗ ಅಮೆರಿಕದ ಕಡೆಯೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದರು.

ನವೆಂಬರ್ 26, 2008 ರಂದು, 10 ಮಂದಿ ಪಾಕಿಸ್ತಾನಿ ಭಯೋತ್ಪಾದಕರ ಗುಂಪು ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಮಾರ್ಗವನ್ನು ಬಳಸಿಕೊಂಡು ಮುಂಬೈಗೆ ನುಸುಳಿದ ನಂತರ, ರೈಲ್ವೆ ನಿಲ್ದಾಣ, ಎರಡು ಐಷಾರಾಮಿ ಹೋಟೆಲ್‌ಗಳು ಮತ್ತು ಯಹೂದಿ ಕೇಂದ್ರದ ಮೇಲೆ ಸಂಘಟಿತ ದಾಳಿ ನಡೆಸಿದ್ದರು.

ದೇಶಾದ್ಯಂತ ಆಘಾತಕಾರಿ ಅಲೆಗಳನ್ನು ಉಂಟುಮಾಡಿದ ಸುಮಾರು 60 ಗಂಟೆಗಳ ದಾಳಿಯಲ್ಲಿ 166 ಜನರು ಅಂದು ಮೃತಪಟ್ಟಿದ್ದರು. ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಮತ್ತಷ್ಟು ದ್ವೇಷ ಉಂಟಾಗುವಂತೆ ಮಾಡಿದ್ದರು.

ನವೆಂಬರ್ 2012 ರಲ್ಲಿ, ಪಾಕಿಸ್ತಾನಿ ಗುಂಪಿನಲ್ಲಿ ಬದುಕುಳಿದ ಏಕೈಕ ಬಂದೂಕುಧಾರಿ ಅಜ್ಮಲ್ ಅಮೀರ್ ಕಸಬ್‌ನನ್ನು ಪುಣೆಯ ಯೆರವಾಡ ​​ಜೈಲಿನಲ್ಲಿ ಗಲ್ಲಿಗೇರಿಸಲಾಯಿತು. ಭೀಕರ ದಾಳಿಯಲ್ಲಿ ಭಾಗಿಯಾದವರನ್ನು ಶಿಕ್ಷಿಸುವಂತೆ ಭಾರತ ಪಾಕಿಸ್ತಾನದ ಮೇಲೆ ಒತ್ತಡ ಹೇರುತ್ತಿದೆ ಆದರೆ ದಾಳಿಯ ಆರೋಪಿಗಳ ವಿಚಾರಣೆಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಗತಿಯಾಗಿಲ್ಲ.

ಮುಂಬೈ ದಾಳಿಯ ಶಂಕಿತ ತಹವ್ವೂರ್ ಹುಸೇನ್ ರಾಣಾನ ರೇಖಾಚಿತ್ರವನ್ನು ಚಿಕಾಗೋ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ತಹವ್ವೂರ್ ರಾಣಾ ಅರ್ಜಿಯನ್ನು ಯುಎಸ್ ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದರಿಂದ, ಆತನ ಹಸ್ತಾಂತರಕ್ಕೆ ಅನುಮತಿ ಸಿಕ್ಕಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button