ಬೀದರ ಸೆಪ್ಟೆಂಬರ್ 15 (ಕ.ವಾ.):- ಸೆ.16ರಂದು ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾದಂಡಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಪರೀಕ್ಷೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷೆಯಲ್ಲಿ ಅಕ್ರಮ, ಅವ್ಯವಹಾರ ನಡೆಯದಂತೆ ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನೂಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದ್ದರಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್ ಪೇಜರ್, ಜೆರಾಕ್ಸ್, ಟೈಪಿಂಗ್, ಟ್ರೇನಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಅಂಗಡಿಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ನಕಲು ಬರೆದ ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಪ್ರಕಟಣೆ ತಿಳಿಸಿದೆ.