ಸಿಎಂ ಬಿಎಸ್‌ವೈ- ಎಚ್‌ಡಿಕೆ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿ ಕುತೂಹಲ ಮೂಡಿಸಿದೆ.
ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಕುಮಾರಸ್ವಾಮಿಯವರು ಅವರು ಯಡಿಯೂರಪ್ಪ ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಶಾಸಕರಾದ ಸಿ ಎಸ್ ಪುಟ್ಟರಾಜು, ಶ್ರೀನಿವಾಸ್ ಹಾಗೂ ಮಳವಳ್ಳಿ ಶಾಸಕ ಅನ್ನದಾನಿ ಜೊತೆಗೆ ಸಿಎಂರನ್ನು ಭೇಟಿ ಮಾಡಿದ ಕುಮಾರಸ್ವಾಮಿಯವರು ಕೆಲವು ಪ್ರಮುಖ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಮಂಡ್ಯ ಮೈಶುಗರ್ ಖಾಸಗೀಕರಣ ಸಮಸ್ಯೆ, ಮನ್ಮುಲ್ ಅಕ್ರಮ ಪ್ರಕರಣ, ಜಿಲ್ಲಾ ಪಂಚಾಯಿತಿ ತಾ.ಪಂ ಮೀಸಲಾತಿ ವಿಚಾರಗಳ ಬಗ್ಗೆ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಜೊತೆಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಮೈಶುಗರ್ ಕಾರ್ಖಾನೆ ಖಾಸಗೀಕರಣ ಹಾಗೂ ಮನ್ಮುಲ್ ಹಗರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಹಾಗೂ ಮನ್ಮುಲ್ ಹಗರಣವನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಪ್ರತಿಭಟನಾ ಧರಣಿ ನಡೆದಿದೆ.
ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಕುಮಾರಸ್ವಾಮಿಯವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮಂಡ್ಯ ಜಿಲ್ಲೆಯ ಅಭಿವೃದ್ದಿ ವಿಚಾರವಾಗಿಯೂ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Latest Indian news

Popular Stories