ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ತಾಲ್ಲೂಕಿನ ಜೋಡುಪಾಲ ಸಮೀಪ ಮೈಸೂರು-ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಇದರಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.
ರಸ್ತೆಯ ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿದ್ದವು. ತಕ್ಷಣ ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಗುಚಿದ್ದ ಬಸ್ ಅನ್ನು ಬದಿಗೆ ಸರಿಸಿ ರಸ್ತೆಯ ಒಂದು ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸದ್ಯ ಬಸ್ ತೆರವು ಕಾರ್ಯಾಚರಣೆ ನಡೆಯುತ್ತಿದೆ
‘ಗೌರಿಶಂಕರ ಎಂಬ ಖಾಸಗಿ ಬಸ್ ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು. ಇಬ್ಬರಿಗೆ ಲಘು ಗಾಯಗಳಾಗಿದ್ದು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ರಸ್ತೆಯ ಒಂದು ಬದಿಯಲ್ಲಿ ಸದ್ಯ ವಾಹನಗಳು ಸಂಚರಿಸುತ್ತಿವೆ. ಬಸ್ ತೆರವುಗೊಳಿಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.