ರಾಯಚೂರು, ಮೇ.೩೧ (ಕ.ವಾ):- ಕೋವಿಡ್ ಸಂಕಷ್ಟ ಕಾಲದಲ್ಲಿ ಸರ್ಕಾರಿ ವೈದ್ಯರು ತಮಗೆ ವಹಿಸಿದ ಜವಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಬೇಕು, ಇಲ್ಲದಿದ್ದಲ್ಲೀ ಅವರು ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಎಚ್ಚರಿಕೆ ನೀಡಿದರು.
ಅವರು ಮೇ.೩೧ರ ಸೋಮವಾರ ಜಿಲ್ಲೆಯ ದೇವದುರ್ಗ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿಗತಿಯನ್ನು ಪರಿಶೀಲಿಸಿ, ಮಾತನಾಡಿದರು.
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂಬ ದೂರು ಕೇಳಿ ಬಂದಿದೆ, ಕೊರೋನಾ ಕಾಲದಲ್ಲಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಗಳಾಗಬಾರದು, ಆದ ಕಾರಣ ಈ ಆಸ್ಪತ್ರೆಯಲ್ಲಿ ವಿವಿಧ ಪಾಳಿಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರ ಬಗ್ಗೆ ನಿಗಾವಹಿಸಿ, ಮಾಹಿತಿ ನೀಡುವಂತೆ ತಹಶೀಲ್ದಾರ್ ಮಾಧುರಾಜ್ ಯಾಳಗಿ ಅವರಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕೋವಿಡ್-೧೯ ಸೋಂಕು ಸಂಕಷ್ಟವನ್ನು ತಂದೊಡ್ಡಿದೆ, ಇಂತಹ ಸನ್ನಿವೇಶದಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿ, ಗುಣಪಡಿಸಬೇಕು, ವೈದ್ಯರು ತಮ್ಮ ಕರ್ತವ್ಯವನ್ನು ಪ್ರಮಾಣ ಕವಾಗಿ ನಿರ್ವಹಿಸಬೇಕು ಇಂತಹ ಸಂದರ್ಭದಲ್ಲಿ ಚಿಕಿತ್ಸೆ ನೀಡದೆ, ಕರ್ತವ್ಯಕ್ಕೆ ಗೈರು ಹಾಜರಾಗುವ ವೈದ್ಯರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಕೋರಿ ಭಾರತೀಯ ಮೆಡಿಕಲ್ ಕೌನ್ಸಿಲ್ ಹಾಗೂ ಕರ್ನಾಟಕ ಮೆಡಿಕಲ್ ಕೌನ್ಸಿಲ್ಗೆ ಲಿಖಿತವಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಸಿದರು.
ಕರ್ತವ್ಯಕ್ಕೆ ಗೈರಾಗುವ ವೈದ್ಯರಿಗೆ ಕನಿಷ್ಠ ಐದು ವರ್ಷಗಳ ಕಾಲ ಅಮಾನತು ಮಾಡುವ ಕ್ರಮಕೈಗೊಳ್ಳಲಾಗುವುದು, ಅವರಿಗೆ ನೋಟಿಸ್ ನೀಡಿ ಕಾದುಕುಳಿತುಕೊಳ್ಳುವ ಸಮಯವಿದಲ್ಲ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಈ ಬಗ್ಗೆ ವರದಿ ಸಲ್ಲಿಸಬೇಕು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿüಕಾರಿಗಳ ಗಮನಕ್ಕೆ ತರಬೇಕೆಂದು ಜಿಲ್ಲಾಧಿಕಾರಿಯವರು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಾಧುರಾಜ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಹುಲಿಮನಿಗೌಡ, ಜನರಲ್ ಸರ್ಜನ್ ಡಾ. ಶಿವಾನಂದ ಚಂದನವರ್ ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿದ್ದರು.
ಆಸ್ಪತ್ರೆ ಪರಿಶೀಲನೆ:
ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ಮೇ.೩೧ರ ಸೋಮವಾರ ಜಿಲ್ಲೆಯ ದೇವದುರ್ಗ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿಗತಿಯನ್ನು ಅವಲೋಕಿಸಿದರು.
ಮೊದಲಿಗೆ ಶೌಚಾಲಯವನ್ನು ಪರಿಶೀಲಸಿದ ಅವರು ಪ್ರತಿ ಎರಡು ತಾಸುಗೊಮ್ಮೆ ನೀರು ಹಾಗೂ ಬಿಜಿಂಗ್ ಪೌಡರ್ ಸೇರಿದಂತೆ ಅಗತ್ಯ ವಸ್ತುಗಳನ್ನು ಬಳಸಿ ಶೌಚಾಲಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಐಸಿಯು, ವೆಂಟಿಲೇಟರ್ ಹಾಗೂ ಇತರೆ ವಾರ್ಡ್ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ವಾರ್ಡಿನಲ್ಲಿದ್ದ ರೋಗಿಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಕುರಿತು ಮಾಹಿತಿ ಪಡೆದರು.
ತಹಶೀಲ್ದಾರ್ ಮಾಧುರಾಜ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಹುಲಿಮನಿಗೌಡ, ಜನರಲ್ ಸರ್ಜನ್ ಡಾ. ಶಿವಾನಂದ ಚಂದನವರ್, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿದ್ದರು.