ವಿಜಯಪುರ: ಭೂಕಂಪನದ ಕುರಿತು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಿಧಾನ ಮಂಡಲ ಅಧಿವೇಶನದಲ್ಲಿ ಧ್ವನಿ

ವಿಜಯಪುರ: ವಿಜಯಪುರ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿರುವ ಭೂಕಂಪನದ ಕುರಿತು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಿಧಾನ ಮಂಡಲ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಈವರೆಗೆ ಸುಮಾರು 52 ಬಾರಿ ಭೂಕಂಪನವಾಗಿದೆ. ಜನರು ಆತಂಕದಲ್ಲಿದ್ದಾರೆ. ಮನೆಯ ಹೊರಗಡೆ ಮಲಗಬೇಕೆಂದರೆ ಮಳೆ ಇರುತ್ತದೆ. ಮನೆ ಒಳಗಡೆ ಕುಳಿತುಕೊಳ್ಳಬೇಕೆಂದರೆ ಭೂಕಂಪನವಾಗುತ್ತದೆ ಎಂದು ಜನ ಹೆದರುತ್ತಿದ್ದಾರೆ. 2010ರಲ್ಲಿ 24 ಬಾರಿ ಮತ್ತು 2021ರಲ್ಲಿ 25 ಬಾರಿ ಸೇರಿದಂತೆ ಈವರೆಗೆ ಒಟ್ಟು 52 ಬಾರಿ ಭೂಮಿ ಕಂಪಿಸಿದೆ ಎಂದು ಅವರು ತಿಳಿಸಿದರು.

ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ. ಜಿಲ್ಲಾಡಳಿತ ಮತ್ತು ಗಣಿ ಭೂವಿಜ್ಞಾನ ಇಲಾಖೆ ಸ್ಪಷ್ಟ ತಾಂತಿಕ ಮಾಹಿತಿಯನ್ನು ನೀಡುತ್ತಿಲ್ಲ. ಹೀಗಾಗಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ತಜ್ಞರನ್ನು ಕರೆಯಿಸಿ ಭೂಕಂಪನಕ್ಕೆ ಕಾರಣರ ಕುರಿತು ಅಧ್ಯಯನ ನಡೆಸಬೇಕು. ಈ ಮೂಲಕ ಜನರಲ್ಲಿರುವ ಪ್ರಾಣ ಭಯವನ್ನು ಹೊಗಲಾಡಿಸಬೇಕು ಎಂದು ಅವರು ಆಗ್ರಹಿಸಿದರು.

ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ 2020ರಲ್ಲಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಉಂಟಾಗಿಲ್ಲ. 2021 ಮತ್ತು 2022ರಲ್ಲಿ ಭೂಕಂಪನ ಉಂಟಾಗಿರುವ ಮಾಹಿತಿಗಳು ಲಭ್ಯ ಇವೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಸಂಸ್ಥೆಗಳ ವೈಜ್ಞಾನಿಕ ಅಧಿಕಾರಿಗಳ ತಂಡ ವಿಜಯಪುರ ಜಿಲ್ಲೆಯ ಭೂಕಂಪನ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಭೂಕಂಪಗಳ ಬಗ್ಗೆ ಅರಿವು ಮೂಡಿಸಿದೆ. ಭೂಕಂಪನದಿಂದ ಉಂಟಾಗುವ ಆಪಾಯಗಳನ್ನು ಹೇಗೆ ತಗ್ಗಿಸಬಹುದು ಎಂಬುದರ ಕುರಿತು ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಲಾಗಿದೆ. ಜೊತೆಗೆ ಈ ಭೂಕಂಪನದ ಕುರಿತು ಹೆಚ್ಚಿನ ಅಧ್ಯಯನ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಸಹಯೋಗದಲ್ಲಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಸಂಸ್ಥೆಗಳಾದ ಭೌತಿಕ ಸಂಶೋಧಾ ಸಂಸ್ಥೆ (NGRI) ಮತ್ತು ಭಾರತೀಯ ಭೂವಿಜ್ಞಾನ ವೈಜ್ಞಾನಿಕ ಸರ್ವೇಕ್ಷಣೆ ಸಂಸ್ಥೆ (GSI) ಹಾಗೂ ರಾಷ್ಟ್ರೀಯ ಶೀಲಾ ಯಂತ್ರಶಾಸ್ತ್ರ (NIRM) ಸಂಸ್ಥೆಗಳ ವೈಜ್ಞಾನಿಕ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ಮಾಡಿ ಅಧ್ಯಯನ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.

Latest Indian news

Popular Stories