ಉಡುಪಿ ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿ

ಉಡುಪಿ: ಪ್ರಸ್ತುತ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿಗೆ ಕುಡಿಯುವ ನೀರಿನ ಮೂಲಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಕೈಗೊಳ್ಳಲಾಗುತ್ತಿದೆ.

ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಒಟ್ಟು 247 ಗ್ರಾಮಗಳಿದ್ದು, ಇವುಗಳಲ್ಲಿ ಬ್ರಹ್ಮಾವರತಾಲೂಕಿನ 25 ಗ್ರಾಮ ಪಂಚಾಯತ್‌ಗಳ 42 ಗ್ರಾಮಗಳ 337 ಜನವಸತಿ ಪ್ರದೇಶ, ಕಾಪು ತಾಲೂಕಿನ 10 ಗ್ರಾಮ ಪಂಚಾಯತ್‌ಗಳಲ್ಲಿ 16 ಗ್ರಾಮಗಳ 100 ಜನವಸತಿ ಪ್ರದೇಶ, ಉಡುಪಿ ತಾಲೂಕಿನ 12 ಗ್ರಾಮ ಪಂಚಾಯತ್‌ಗಳ 23 ಗ್ರಾಮಗಳ 164 ವಸತಿ ಪ್ರದೇಶ, ಹೆಬ್ರಿತಾಲೂಕಿನ 9 ಗ್ರಾಮ ಪಂಚಾಯತ್‌ಗಳ 15 ಗ್ರಾಮಗಳ 79 ಜನವಸತಿ ಪ್ರದೇಶ, ಕಾರ್ಕಳ ತಾಲೂಕಿನ 21 ಗ್ರಾಮ ಪಂಚಾಯತ್‌ನ 26 ಗ್ರಾಮಗಳ 88 ಜನವಸತಿ ಪ್ರದೇಶ, ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತ್‌ಗಳ 22 ಗ್ರಾಮಗಳ 244 ವಸತಿ ಪ್ರದೇಶ ಹಾಗೂ ಕುಂದಾಪುರ ತಾಲೂಕಿನ 38 ಗ್ರಾಮ ಪಂಚಾಯತ್‌ನ 59 ಗ್ರಾಮಗಳ 415 ಜನವಸತಿ ಪ್ರದೇಶ ಸೇರಿದಂತೆ ಒಟ್ಟು ಜಿಲ್ಲೆಯ 130 ಗ್ರಾಮ ಪಂಚಾಯತ್‌ಗಳ 203 ಗ್ರಾಮಗಳ 1427 ಜನವಸತಿ ಪ್ರದೇಶಗಳಲ್ಲಿ ಮುಂದಿನ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಅಂದಾಜಿಸಲಾಗಿರುತ್ತದೆ.

ಕುಡಿಯುವ ನೀರಿನ ಸಮಸ್ಯೆ ಎದುರಿಸುವ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಸರ್ಕಾರಿ ಹಾಗೂ ಖಾಸಗೀ ಒಡೆತನದ 70 ಕ್ಕೂ ನೀರು ಲಭ್ಯವಿರುವ ಕೊಳವೆ ಬಾವಿಗಳನ್ನು ಹಾಗೂ 25 ಬಾವಿಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕು (ಭಾಗಶಃ) ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಈ ತಾಲೂಕುಗಳಿಗೆ ತಲಾ ರೂ.25.00 ಲಕ್ಷದಂತೆ ಒಟ್ಟು ರೂ.75.00 ಲಕ್ಷ ಅನುದಾನ ಕುಡಿಯುವ ನೀರಿನ ತುರ್ತು ಅಗತ್ಯತೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರದಿಂದ ಬಿಡುಗಡೆಯಾಗಿರುತ್ತದೆ. ಅಲ್ಲದೆ ಪ್ರತೀ ತಾಲೂಕಿಗೆ ತಲಾ ರೂ.20.00 ಲಕ್ಷದಂತೆ ಒಟ್ಟು ರೂ.140.00 ಲಕ್ಷ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗಿದೆ.

ಸಾರ್ವಜನಿಕರು ಸ್ಥಳೀಯ ಗ್ರಾಮ ಪಂಚಾಯತ್ ನಿಂದ ಸರಬರಾಜು ಮಾಡುವ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡದೆ ಹಿತಮಿತವಾಗಿ ಬಳಸಬೇಕು. ಕುಡಿಯುವ ನೀರಿನ ಪೈಪ್‌ಲೈನ್‌ನಲ್ಲಿ ದುರಸ್ತಿ ಬಂದಲ್ಲಿ ತುರ್ತಾಗಿ ಗ್ರಾಮ ಪಂಚಾಯತ್ ವತಿಯಿಂದ ಕ್ರಮವಹಿಸಲು ಈಗಾಗಲೇ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಖಾಸಗಿ ಬೋರ್‌ವೆಲ್, ಬಾವಿ ಗುರುತಿಸಿ, ಅವುಗಳನ್ನು ಬಾಡಿಗೆಗೆ ತೆಗೆದುಕೊಂಡು ನೀರು ಒದಗಿಸಲು ತಿಳೀಸಿದೆ. ಎಸ್.ಎಲ್.ಆರ್.ಎಮ್ ವಾಹನದ ಮೂಲಕ ಅಥವಾ ಖಾಸಗಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಸುವ ಅನಿವಾರ್ಯತೆ ಉಂಟಾದಲ್ಲಿ ಸಂಬಂದಿಸಿದ ಗ್ರಾಮ ಪಂಚಾಯತ್ ವತಿಯಿಂದ ಕ್ರಮ ವಹಿಸಲು ಸೂಚಿಸಿದೆ. ಸಾರ್ವಜನಿಕರು ಕುಡಿಯುವ ನೀರನ್ನು ಉದ್ಯಾನಗಳಿಗೆ, ವಾಹನ ತೊಳೆಯಲು ಇತ್ಯಾದಿ ಅನ್ಯ ಉದ್ದೇಶಕ್ಕೆ ಬಳಸಬಾರದು. ಅನ್ಯ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸಿದಲ್ಲಿ ಸ್ಥಳೀಯ ಪಂಚಾಯತ್ ವತಿಯಿಂದ ಸರಬರಾಜಾಗುತ್ತಿರುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ತಿಳಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಜಿಲ್ಲಾ ಮಟ್ಟದಲ್ಲಿ ತೆರೆಯಲಾದ 24*7 ಸಹಾಯವಾಣಿ ಸಂಪರ್ಕ ಸಂಖ್ಯೆ 18004257049 ಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories