Udupi

ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಜರುಗಿತು.

ಪರಮಪ್ರಸಾದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ.ಡಾ. ಜೆರಾಲ್ಡ್‌ ಐಸಾಕ್‌ ಲೋಬೊ ವಹಿಸಿ ಭಕ್ತಾದಿಗಳಿಗೆ ಸಂದೇಶ ನೀಡಿದರು.

ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ನಾವು ತೋರಿಸುವ ಪ್ರೀತಿ ಕೇವಲ ತೋರ್ಪಡಿಕೆಯ ಪ್ರೀತಿಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸುವಂತಿರಬೇಕು. ಪ್ರೀತಿ ಸೇವೆ ಕ್ರೈಸ್ತ ಧರ್ಮದ ಮೂಲ ತತ್ತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಲು ಹಿಂಜರಿಯಬಾರದು. ಯೇಸು ಸ್ವಾಮಿ ಶಿಲುಬೆಗೇರಿ ನಮ್ಮೆಲ್ಲರ ಪಾಪಗಳನನ್ನು ಕ್ಷ ಮಿಸಿ ಮನುಕುಲಕ್ಕೆ ಮಾದರಿಯಾದರು. ಅದರಂತೆ ನಾವು ನಮ್ಮ ಜೀವನದಲ್ಲಿ ಕ್ಷಮೆ ಪ್ರೀತಿ, ಸೇವೆಯ ಮೂಲಕ ದೈವ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಪಣತೊಡುವಂತಾಗುವಂತೆ ಕರೆ ನೀಡಿದರು.

ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರು ವಂದನೀಯ ಸಿರಿಲ್ ಲೋಬೊ ಪರಮಪ್ರಸಾದ ಆರಾಧನೆಯನ್ನು ನೆರವೇರಿಸಿದರು. ಬಳಿಕ ಪರಮಪ್ರಸಾದವನ್ನು ವಿಶೇಷವಾಗಿ ಅಲಂಕರಿಸಲ್ಪಟ್ಟ ತೆರೆದ ವಾಹನದಲ್ಲಿ ರಾಜಬೀದಿಯಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ದು ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಮೈದಾನದಲ್ಲಿ ಬಹಿರಂಗ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು.

ಈ ವೇಳೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚಿನ ಸಹಾಯಕ ಧರ್ಮಗುರು ವಂ| ಲಿಯೊ ಪ್ರವೀಣ್ ಡಿ’ಸೋಜಾ ಪವಿತ್ರ ಬೈಬಲ್ ವಾಚನ ಮಾಡಿ ತಮ್ಮ ಪ್ರವಚನದಲ್ಲಿ ಪರಮ ಪ್ರಸಾದವು ಏಕತೆ, ತ್ಯಾಗ ಹಾಗೂ ಕ್ಷಮೆಯ ಸಂಕೇತವಾಗಿದ್ದು, ನಿಜವಾದ ಪ್ರೀತಿಯು ನಮ್ಮ ನೆರೆಹೊರೆಯವರಲ್ಲಿ ತೋರಿಸುವುದರಲ್ಲಿ ಅಡಗಿದ್ದು, ಯೇಸು ಸ್ವಾಮಿಯು ಶಿಲುಬೆಗೇರಿ ಅದನ್ನು ನಮಗೆ ತೋರಿಸಿಕೊಟ್ಟಿರುತ್ತಾರೆ ಎಂದರು.

ಉಡುಪಿ ಧರ್ಮಪ್ರಾಂತ್ಯವ್ಯಾಪ್ತಿಯ 51 ಚರ್ಚ್‌ಗಳಿಂದ ಸುಮಾರು 3000 ಕ್ಕೂ ಅಧಿಕ ಮಂದಿ ಭಕ್ತಾದಿಗಳು, 50ಕ್ಕೂ ಅಧಿಧಕ ಧರ್ಮಗುರುಗಳು, 100ಕ್ಕೂ ಅಧಿಕ ಧರ್ಮಭಗಿನಿಯರು ಭಾಗವಹಿಸಿದ್ದರು.

ಇದೇ ವೇಳೆ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕ್ರಿಸ್ತ ಜಯಂತಿ ಆಚರಣೆ -2025 ನೇ ವರ್ಷದ ಸಿದ್ದತೆಗೆ ವಿದ್ಯುಕ್ತವಾಗಿ ಲೋಗೊ ಅನಾವರಣಗೊಳಿಸುವ ಮೂಲಕ ಧರ್ಮಾಧ್ಯಕ್ಷರು ಚಾಲನೆ ನೀಡಿದರು.

ಉಡುಪಿ ಧರ್ಮಪ್ರಾಂತ್ಯದ ವಿಕಾರ್‌ ಜನರಲ್‌ ಮೊನ್ಸಿಂಜ್ಞೋರ್‌ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ|ಡಾ| ರೋಶನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಡೆನಿಸ್‌ ಡೆಸಾ, ಕಲ್ಯಾಣಪುರ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರುಗಳಾದ ವಂ| ವಲೇರಿಯನ್ ಮೆಂಡೊನ್ಸಾ, ವಂ|ಡಾ| ಲೆಸ್ಲಿ ಡಿಸೋಜಾ, ವಂ| ಪಾವ್ಲ್ ರೇಗೊ, ವಂ| ಚಾರ್ಲ್ಸ್ ಮಿನೇಜಸ್, ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ| ರೋಕ್ ಡೆಸಾ, ಧರ್ಮಪ್ರಾಂತ್ಯದ ಪಾಲನಾ ಸಮಿತಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button