ಗೃಹ ಲಕ್ಷ್ಮೀ ಯೋಜನೆ: ಉಚಿತ ನೊಂದಣಿ ಪ್ರದರ್ಶನ ಫಲಕ ಅಳವಡಿಸಲು ಸೂಚನೆ

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಎಲ್ಲ ಸೇವಾ ಕೇಂದ್ರಗಳಲ್ಲಿ ಉಚಿತ ನೊಂದಣಿ ಫಲಕ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ಆವರಣದ ಕೇಸ್ವಾನ್ ಕೊಠಡಿಯಲ್ಲಿ ಸೋಮವಾರು ಜರುಗಿದ ಗೃಹ ಲಕ್ಷ್ಮೀ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ 593954 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಯೋಜನೆಯ ನೋಂದಣಿ ಆರಂಭದಿಂದ ಈವರೆಗೆ ಜಿಲ್ಲೆಯ 121084 ಫಲಾನುಭವಿಗಳು ನೊಂದಾಯಿಸಿಕೊಂಡಿದ್ದು, ಗೃಹ ಲಕ್ಷ್ಮೀ ಯೋಜನೆಯಡಿ ನೋಂದಣಿಗೆ ಯಾವುದೇ ಶುಲ್ಕವಿರುವುದಿಲ್ಲ. ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಮಾತ್ರ ಅವಕಾಶವಿದ್ದು, ಈ ಕೇಂದ್ರಗಳಲ್ಲಿ ಲ್ಯಾಮಿನೇಶನ್ ವ್ಯವಸ್ಥೆ ಇರುವುದಿಲ್ಲ ಈ ಕುರಿತು ಸಾರ್ವಜನಿಕರಿಗೆ ತಿಳಿ ಹೇಳಬೇಕು ಎಂದು ಸೂಚಿಸಿದರು.
ಫಲಾನುಭವಿಗಳ ನೊಂದಣಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದರೆ ಆಯಾ ಸೇವಾ ಕೇಂದ್ರದ ನೋಡಲ್ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಯಾವುದೇ ಲೋಪವಾಗದಂತೆ ಜನಸಂದಣಿಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ತಿಳಿ ಹೇಳಿ ಗೊಂದಲಗಳನ್ನು ತಮ್ಮ ಹಂತದಲ್ಲಿಯೇ ನಿವಾರಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಗೃಹಲಕ್ಷ್ಮೀ ಯೋಜನೆ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಮಟ್ಟದಲ್ಲಿ 584 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಗ್ರಾಮ ಮಟ್ಟದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಥಮ ದರ್ಜೆ ಸಹಾಯಕರು-19, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು-211, ಕಂದಾಯ ನಿರೀಕ್ಷಕರು-16, ಗ್ರಾಮ ಆಡಳಿತ ಅಧಿಕಾರಿಗಳು-252 ಹಾಗೂ ವಲಯ ಮೇಲ್ವಿಚಾರಕರು ಸೇರಿದಂತೆ ಒಟ್ಟು 584 ನೋಡಲ್ ಆಧಿಕಾರಿಗಳನ್ನು ನೇಮಿಸಲಾಗಿದೆ.


ವಿವಿಧ ಇಲಾಖೆಗಳ ತಾಲೂಕಾ ಮಟ್ಟದ 21 ಅಧಿಕಾರಿಗಳು, 7 ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಸೇರಿದಂತೆ ಒಟ್ಟು 28 ತಾಲೂಕಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.


ಜಿಲ್ಲೆಯಲ್ಲಿ 300 ಗ್ರಾಮ ಒನ್ ಕೇಂದ್ರಗಳು, 211 ಬಾಪೂಜಿ ಸೇವಾ ಕೇಂದ್ರಗಳು ಹಾಗೂ 26 ಕರ್ನಾಟಕ ಒನ್ ಕೇಂದ್ರಗಳು ಸೇರಿದಂತೆ 537 ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Latest Indian news

Popular Stories